ಹರಿಯಾಣದ ಕುರುಕ್ಷೇತ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ನಂತರ ಜಜ್ಜರ್ ಜಿಲ್ಲೆಯ ಬಾಡ್ಸಾ ಎಂಬಲ್ಲಿ ನಿರ್ಮಿಸಲಾಗಿರುವ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಜಜ್ಜರ್ನಲ್ಲಿ ಏಮ್ಸ್ ಕ್ಯಾಂಪಸ್ನಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ಹಾಗೂ ಅತ್ಯಂತ ಸುಸಜ್ಜಿತ ವ್ಯವಸ್ಥೆಗಳನ್ನು ಒಳಗೊಂಡಿರುವ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯನ್ನು ನಿರ್ಮಿಸಲಾಗಿದೆ.
೭೦೦ ಹಾಸಿಗೆಯುಳ್ಳ ಈ ವಿನೂತನ ಆಸ್ಪತ್ರೆಯಲ್ಲಿ ಸರ್ಜಿಕಲ್ ಆಂಕಾಲಜಿ, ನ್ಯೂಕ್ಲಿಯರ್ ಚಿಕಿತ್ಸೆ ಸೇರಿದಂತೆ ಹಲವಾರು ವಿಶೇಷ ಚಿಕಿತ್ಸೆಗಳನ್ನು ನೀಡಲಾಗುವುದು. ಇದಲ್ಲದೇ ಹಾಸ್ಟೆಲ್, ವೈದ್ಯರ ಕೊಠಡಿ, ರೋಗಿಗಳ ಸಹಾಯಕರಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆಯೂ ಇದೆ.
ಫರೀದಾಬಾದ್ನಲ್ಲಿ ಇಎಸ್ಐ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜು ಕಟ್ಟಡವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ೫೧೦ ಹಾಸಿಗೆಯುಳ್ಳ ಈ ಆಸ್ಪತ್ರೆಯನ್ನು ಅತ್ಯಾಧುನಿಕ ಗುಣಮಟ್ಟದಲ್ಲಿ ನಿರ್ಮಿಸಲಾಗಿದೆ. ಅರ್ಹ ಕಾರ್ಮಿಕ ವರ್ಗದ ಜನರಿಗೆ ಅನುಕೂಲವಾಗುವಂತೆ ಈ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ.
ನಂತರ ಪಂಚಕುಲಾಗೆ ತೆರಳಲಿರುವ ನರೇಂದ್ರ ಮೋದಿ, ಶ್ರೀ ಮಾತಾ ಮಾನಸಾ ದೇವಿ ದೇಗುಲ ಕಾಂಪ್ಲೆಕ್ಸ್ನಲ್ಲಿ ರಾಷ್ಟ್ರೀಯ ಆಯುರ್ವೇದ ಸಂಸ್ಥೆ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಕುರುಕ್ಷೇತ್ರದಲ್ಲಿ ಶ್ರೀ ಕೃಷ್ಣ ಆಯುಷ್ ವಿವಿ ಕಟ್ಟಡ ನಿರ್ಮಾಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕರ್ನಾಲ್ನಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕಟ್ಟಡ, ಪಾಣಿಪತ್ನಲ್ಲಿ ಬ್ಯಾಟಲ್ಸ್ ಆಫ್ ಪಾಣಿಪತ್ ಮ್ಯೂಸಿಯಂ ನಿರ್ಮಾಣಕ್ಕೂ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ನಂತರ ಸ್ವಚ್ಛ ಶಕ್ತಿ ೨೦೧೯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಪ್ರಧಾನ ನರೇಂದ್ರ ಮೋದಿಯವರು ಹಲವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ನಂತರ ಕುರುಕ್ಷೇತ್ರದಲ್ಲಿ ನಡೆಯಲಿರುವ ಸ್ವಚ್ಚ ಸುಂದರ್ ಶೌಚಾಲಯ್ ಪ್ರದರ್ಶನ ವೀಕ್ಷಿಸಲಿದ್ದಾರೆ. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ.
ಈ ಸಮಾರಂಭಕ್ಕೆ ದೇಶದ ನಾನಾ ಭಾಗದ ಮಹಿಳಾ ಪಂಚಾಯಿತಿ ಸದಸ್ಯರು, ಸರಪಂಚರು ಆಗಮಿಸಲಿದ್ದಾರೆ.